ಮೂಡುಬಿದಿರೆ: ಸಪ್ತಸಂಧ್ಯಾ -ಸಹಕಾರಿ ಚಿಂತನ ಸರಣಿ ಮತ್ತು ಸಾಂಸ್ಕೃತಿಕ ವೈಭವಗಳನ್ನೊಳಗೊಂಡ `ಸಹಕಾರ ಸಪ್ತಾಹ ಸಂಭ್ರಮ-2022' ನವೆಂಬರ್ 14ರಿಂದ 20ರ ತನಕ ಮೂಡುಬಿದಿರೆ ಕೋ ಆಪರೇಟಿವ್ ಸರ್ವಿಸ್ ಸೊಸೈಟಿ ಆಶ್ರಯದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ ಬಾಹುಬಲಿ ಪ್ರಸಾದ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನ.14ರಂದು ಸಂಜೆ 5.30ಕ್ಕೆ ಸಂಸ್ಥಾಪಕರ ದಿನಾಚರಣೆ ನಡೆಯಲಿದೆ. ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಕಾರ್ಯಕ್ರಮವನ್ನು ಇಂಧನ ಸಚಿವ ವಿ.ಸುನೀಲ್ ಕುಮಾರ್ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷ ಎಂ.ಬಾಹುಬಲಿ ಪ್ರಸಾದ್ ವಹಿಸುವರು. ನಿವೃತ್ತ ಮುಖ್ಯೋಪಾಧ್ಯಾಯ ಅಂಡಾರು ಗುಣಪಾಲ ಹೆಗ್ಡೆ ಸಂಸ್ಮರಣಾ ಭಾಷಣ ಮಾಡಲಿದ್ದಾರೆ. ಉದ್ಯಮಿ ಕೆ.ಶ್ರೀಪತಿ ಭಟ್, ಮೂಡುಬಿದಿರೆ ಚೌಟರ ಅರಮನೆಯ ಕುಲದೀಪ್ ಎಂ ಅತಿಥಿಗಳಾಗಿ ಭಾಗವಹಿಸುವರು. ಶಾಸಕ ಉಮಾನಾಥ್ ಕೋಟ್ಯಾನ್ ವಿಶೇಷ ಯೋಜನೆಗಳನ್ನು ಬಿಡುಗಡೆಗೊಳಿಸಲಿದ್ದಾರೆ ಎಂದು ತಿಳಿಸಿದರು.
0 Comments