ಕಾಂಗ್ರೆಸ್ ನೇತೃತ್ವದ ಸರ್ಕಾರದ ಅವಧಿಯಲ್ಲಿ ಆರಂಭಗೊಂಡಿದ್ದ ಸುರತ್ಕಲ್ ಬಳಿಯ ಟೋಲ್ಗೇಟ್ಗೆ ಇಂದು ಮುಕ್ತಿ ದೊರೆತಿದ್ದು ಈ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲು ಮಾಹಿತಿ ಹಂಚಿಕೊಂಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು "ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ಶ್ರೀ ನಿತಿನ್ ಗಡ್ಕರಿ ಹಾಗೂ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು. ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು, ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ" ಎಂದು ಹೇಳಿದರು.
ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೇಂದ್ರದಲ್ಲಿ ರಾಷ್ಟ್ರೀಯ ಹೆದ್ದಾರಿ ಸಚಿವರಾಗಿದ್ದ ಮಂಗಳೂರಿನ ಆಸ್ಕರ್ ಫರ್ನಾಂಡೀಸ್ ರವರು ಈ ಟೋಲ್ಗೇಟ್ ಆರಂಭಿಸಿದ್ದರು. ಆದರೆ ಸಂಸದರಾಗಿ ನಳಿನ್ ಕುಮಾರ್ ಕಟೀಲು ಆಯ್ಕೆಯಾದ ನಂತರ ನಿರಂತರವಾಗಿ ಟೋಲ್ಗೇಟ್ ತೆರವುಗೊಳಿಸುವ ಬಗ್ಗೆ ಮನವಿ ಸಲ್ಲಿಸಿದ್ದರು.
ನವಂಬರ್ ವೇಳೆಯಲ್ಲಿ ಟೋಲ್ಗೇಟ್ ತೆರವುಗೊಳಿಸುವ ಬಗ್ಗೆ ಸಂಸದರು ಹೇಳಿದ್ದರು. ಈ ನಡುವೆ ಹಲವಾರು ಹೋರಾಟಗಾರರು ಟೋಲ್ಗೇಟ್ ಮುತ್ತಿಗೆ ಹಾಕಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದರು. ಇಂದು ಖುದ್ದು ಸಂಸದರೇ ಟೋಲ್ಗೇಟ್ ತೆರವಿನ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದು ಪ್ರಕರಣ ಸುಖಾಂತ್ಯವಾಗಿದೆ.
0 Comments