ಆಳ್ವಾಸ್ ನಲ್ಲಿ ‘ಘಾಂದ್ರುಕ್’ ಕಾದಂಬರಿ ಅವಲೋಕನ - ಸಂವಾದ
ಮೂಡುಬಿದಿರೆ : ‘ಮನುಷ್ಯನಿಗೆ ಮನುಷ್ಯನಾಗಿ ಬದುಕಲು ಕಲಿಸದ ಧರ್ಮ ಯಾಕೆ? ಎಂಬುದು ‘ಘಾಂದ್ರುಕ್’ ಕೃತಿಯ ಒಳನೋಟವೂ ಹೌದು’ ಎಂದು ಕಾದಂಬರಿಕಾರ ಸತೀಶ್ ಚಪ್ಪರಿಕೆ ಹೇಳಿದರು.
ಆಳ್ವಾಸ್ ಕಾಲೇಜಿನ ಸ್ನಾತಕ ಮತ್ತು ಸ್ನಾತಕೋತ್ತರ ಕನ್ನಡ ಹಾಗೂ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗಗಳು ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡ ತಮ್ಮ ‘ಘಾಂದ್ರುಕ್’ ಕಾದಂಬರಿ ಅವಲೋಕನ - ಸಂವಾದ ಕಾರ್ಯಕ್ರಮದಲ್ಲಿ ಅವರು ಪ್ರತಿಕ್ರಿಯಿಸಿದರು.
ಧರ್ಮ ಇಂದು ವ್ಯಾಪಾರಿ ಸರಕಾಗುತ್ತಿದೆ. ಮನುಕುಲದ ಉದ್ಧಾರಕ್ಕಾಗಿ ಬಳಕೆಯಾಗುತ್ತಿಲ್ಲ. ಒಕ್ಕಲೆಬ್ಬಿಸುವುದೂ ಹಿಂಸೆ. ಜಾಗತಿಕ ಮಟ್ಟದಲ್ಲಿ ಏನಾಗುತ್ತಿದೆ ಎಂದು ತಿಳಿದುಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಅವರು ಕಿವಿಮಾತು ಹೇಳಿದರು.
ಕೃತಿಕಾರನ ಬದುಕು ಆತನ ಬರಹದಲ್ಲಿ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಬಿಂಬಿತವಾಗಿರುತ್ತದೆ. ‘ಇಲ್ಲ’ ಎನ್ನುವುದಾದದರೆ, ಆತ ಸುಳ್ಳು ಹೇಳುತ್ತಿರಬಹುದು ಅಥವಾ ಬರಹ ಕದ್ದಿರಬಹುದು ಎಂದರು.
ಪುಸ್ತಕದಷ್ಟು ದೊಡ್ಡ ಆಸ್ತಿ ಬೇರೆ ಇಲ್ಲ. ಪುಸ್ತಕ ಓದಿ. ಬರಹ ತೃಪ್ತಿ ನೀಡುತ್ತದೆ. ಬರೆಯಿರಿ, ಓದಿ. ನಿಮ್ಮ ಪರಿಸರ ನಿಮ್ಮ ಜೀವನ ರೂಪಿಸುತ್ತದೆ ಎಂದ ಅವರು, ದಿನ ಪತ್ರಿಕೆಗಳಲ್ಲಿ ಸಾಹಿತ್ಯ, ಸಾಂಸ್ಕೃತಿಕ ವಿಚಾರಕ್ಕೆ ಆದ್ಯತೆ ಕಡಿಮೆಯಾದ ಕಾರಣ ನಾವು ‘ಬುಕ್ ಬ್ರಹ್ಮ’ ಆರಂಭಿಸಿದೆವು. ಸಾಫ್ಟ್ವೇರ್ ಕಂಪೆನಿಯನ್ನೂ ನಡೆಸುತ್ತಿದ್ದೇವೆ. ರಸ್ತೆ ಬದಿಯ ಸಣ್ಣ ಚಹಾದ ಅಂಗಡಿ ಮಾಡಬೇಕು ಎಂಬುದು ಭವಿಷ್ಯದ ಕನಸು ಎಂದರು.
ಕನ್ನಡದಲ್ಲಿ ವರ್ಷಕ್ಕೆ ೭ ಸಾವಿರ ಪುಸ್ತಕಗಳು ಪ್ರಕಟವಾಗುತ್ತಿವೆ. ಮಾಧ್ಯಮದಲ್ಲಿ ನಾಟಕೀಯ ಬದಲಾವಣೆಗಳು ಆಗಿವೆ. ಜಗತ್ತು ತೀವ್ರ ಚಲನಶೀಲವಾಗಿದೆ. ಸುದ್ದಿ ಹುಟ್ಟುವ ಬಗೆಯೇ ಬದಲಾಗಿದೆ ಎಂದ ಅವರು, ಪಾಶ್ಚಾತ್ಯ ರಾಷ್ಟ್ರಗಳಲ್ಲಿ ಪತ್ರಕರ್ತರಿಗೆ ಹೆಚ್ಚಿನ ಸ್ವಾತಂತ್ರ್ಯ ಹಾಗೂ ಸತ್ಯಕ್ಕೆ ಹೆಚ್ಚು ಅವಕಾಶ ಇದೆ ಎಂದು ವಿಶ್ಲೇಷಿಸಿದರು.
ಎಸ್ಡಿಎಂ ಕಾಲೇಜಿನ ಪ್ರಾಧ್ಯಾಪಕ ಡಾ ರಾಜಶೇಖರ ಕೃತಿ ಪರಿಚಯಿಸಿದರು.
ಆಳ್ವಾಸ್ ಕಾಲೇಜು ಪ್ರಾಂಶುಪಾಲ ಡಾ.ಕುರಿಯನ್, ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಂಯೋಜಕ ಪ್ರಸಾದ್ ಶೆಟ್ಟಿ, ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಯೋಗೀಶ್ ಕೈರೋಡಿ ಇದ್ದರು. ವಿದ್ಯಾರ್ಥಿನಿ ಕವನಾ ಕಾರ್ಯಕ್ರಮ ನಿರೂಪಿಸಿದರು.
0 Comments