ಎಲ್ಲರಿಗೂ ಸಮಾನ ನ್ಯಾಯ ಒದಗಿಸುವುದೇ ಪೋಲಿಸ್ ಇಲಾಖೆಯ ಮುಖ್ಯ ಧ್ಯೇಯ : ಸಂದೇಶ್ ಪಿ ಜಿ ಅಭಿಮತ
ಮೂಡುಬಿದಿರೆ : ಪೋಲಿಸ್ ಕೆಲಸ ತುಂಬಾ ಪವಿತ್ರವಾದ ಕೆಲಸ, ಎಲ್ಲಿ ಮನುಷ್ಯರಿರುತ್ತಾರೆಯೋ ಅಲ್ಲಿ ಗಲಾಟೆ, ಗಲಭೆಗಳಿರುತ್ತವೆ. ಆದರೆ ಅವೆಲ್ಲವನ್ನು ಹಿಡಿತಕ್ಕೆ ತಂದು ಸಾರ್ವಜನಿಕರಲ್ಲಿ ಶಾಂತಿಯ ಬದುಕು ನಿರ್ಮಿಸುವುದು ನಮ್ಮ ಕರ್ತವ್ಯವಾಗಿದೆ. ಎಲ್ಲರಿಗೂ ಸಮಾನವಾದ ನ್ಯಾಯ ಒದಗಿಸುವುದೇ ಪೊಲೀಸ್ ಇಲಾಖೆಯ ಮುಖ್ಯ ಧ್ಯೇಯ ಎಂದು ಮೂಡುಬಿದಿರೆಯ ಪೊಲೀಸ್ ವೃತ್ತ ನಿರೀಕ್ಷಕರಾದ ಸಂದೇಶ್ ಪಿ ಜಿ ಯವರು ಅಭಿಪ್ರಾಯಪಟ್ಟರು. ಅವರು ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿದ್ದ ಪೊಲೀಸ್ ಸಹಕಾರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ಸಮಾಜದಲ್ಲಿ ನಡೆಯುವ ಅನ್ಯಾಯ ಅಕ್ರಮಗಳು, ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಹೋರಾಡಿ ಶಾಂತಿ ಸುವ್ಯವಸ್ಥೆ ಕಾಪಾಡುವುದು, ಜನಗಳ ಮಧ್ಯೆ ಉತ್ತಮ ಭಾಂಧವ್ಯ ಬೆಳೆಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.
ಸಾರ್ವಜನಿಕ ಸುವ್ಯವಸ್ಥೆ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ದಕ್ಷ ಪ್ರಾಮಾಣಿಕ ಅಧಿಕಾರಿಯಾಗಿ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳ ಚಿನ್ನದ ಪದಕ ಗೌರವಕ್ಕೆ ಪಾತ್ರರಾಗಿರುವ ಸಂದೇಶ್ ಪಿ.ಜಿ ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಿದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು.
ಅಧ್ಯಕ್ಷತೆ ವಹಿಸಿ ಮಾತಾನಾಡಿದ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್, ಒಬ್ಬ ದಕ್ಷ ಅಧಿಕಾರಿ ಇದ್ದರೆ ಅಲ್ಲಿನ ವ್ಯವಸ್ಥೆಗಳು ಉತ್ತಮವಾಗಿರುತ್ತದೆ. ಮೂಡುಬಿದಿರೆಗೆ ಅಂತಹ ಪೊಲೀಸ್ ಅಧಿಕಾರಿಯಾಗಿ ಸಂದೇಶ್ ಪಿ ಜಿ ಯವರು ದೊರಕಿರುವುದು ನಮ್ಮೆಲ್ಲರ ಭಾಗ್ಯ. ಈ ರೀತಿ ದೇಶ ಕಟ್ಟುವ ಕೆಲಸ ಮಾಡುತ್ತಿರುವ ಇವರು ಇನ್ನಷ್ಟು ಹೆಚ್ಚಿನ ಸಾಧನೆ ಮಾಡಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್ ಆಡಳಿತ ನಿರ್ದೇಶಕರಾದ ಡಾ.ಸಂಪತ್ ಕುಮಾರ್, ಮುಖ್ಯೋಪಾಧ್ಯಾಯ ಶಿವಪ್ರಸಾದ್ ಭಟ್ ಉಪಸ್ಥಿತರಿದ್ದರು.
ಶಿಕ್ಷಕ ನಿರಂಜನ್ ಪೂಜಾರಿ ಕಾರ್ಯಕ್ರಮವನ್ನು ನಿರೂಪಿಸಿದರು.
0 Comments