ಜ. 12-16 : ಮೂಡುಬಿದಿರೆಯಲ್ಲಿ 85 ನೇ ಅಖಿಲ ಭಾರತ ಪುರುಷ ಹಾಗೂ ಮಹಿಳೆಯರ ಅಂತರ್ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ ಷಿಪ್
ಮೂಡುಬಿದಿರೆ : ಜ 12 ರಿಂದ 16 ರವರೆಗೆ ರಾಜೀವ್ಗಾಂಧಿ ಆರೋಗ್ಯ ವಿಜ್ಞಾನ ವಿವಿ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಅಸೊಸೀಯೇಷನ್ ಆಫ್ ಇಂಡಿಯನ್ ಯುನಿವಸಿ೯ಟಿ ಸಹಭಾಗಿತ್ವದಲ್ಲಿ 85 ನೇ ಅಖಿಲ ಭಾರತ ಪುರುಷ ಹಾಗೂ ಮಹಿಳೆಯರ ಅಂತರ್ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ ಷಿಪ್ ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕ್ರೀಡಾಕೂಟದಲ್ಲಿ ದೇಶದ ನಾನಾ ರಾಜ್ಯಗಳಿಂದ 312 ಕ್ಕೂ ಅಧಿಕ ವಿವಿ ಯಿಂದ 4288 ಅಥ್ಲೀಟ್ಗಳು ಹಾಗೂ 1000 ಕ್ರೀಡಾಧಿಕಾರಿಗಳು ಭಾಗವಹಿಸಲಿದ್ದಾರೆ. ಉದ್ಘಾಟನಾ ಸಮಾರಂಭವು 12 ರಂದು ಸಂಜೆ 4.30ಕ್ಕೆ ನಡೆಯಲಿದ್ದು, ವಿಧಾನಸಭೆ ಸಭಾಧ್ಯಕ್ಷ ಯು.ಟಿ ಖಾದರ್ ಅವರು ಉದ್ಘಾಟಿಸಿ, ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ ಪಾಲ್ಗೊಳ್ಳಲಿದ್ದಾರೆ.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಕುಲಪತಿ ಡಾ ಭಗವಾನ್ .ಬಿ.ಸಿ ಅಧ್ಯಕ್ಷತೆ ವಹಿಸಲಿದ್ದು, ಸಂಸದ ಕ್ಯಾ. ಬ್ರಿಜೇಶ್ ಚೌಟ ಧ್ವಜಾರೋಹಣ ನೆರೆವೇರಿಸಲಿದ್ದಾರೆ. ಶಾಸಕ ಉಮಾನಾಥ ಎ ಕೋಟ್ಯಾನ್, ಮಾಜಿ ಸಚಿವ ಅಭಯಚಂದ್ರ ಜೈನ್, ಕೂಡ್ಲಿಗಿ ಶಾಸಕ ಹಾಗೂ ಆರ್ಜಿಯುಎಚ್ಎಸ್ ಸೆನೆಟ್ ಸದಸ್ಯ ಡಾ. ಶ್ರೀನಿವಾಸ ಎನ್ಟಿ, ಮಾಗಡಿ ಶಾಸಕ ಹಾಗೂ ಆರ್ಜಿಯುಎಚ್ಎಸ್ ಸೆನೆಟ್ ಸದಸ್ಯ ಎಚ್ಸಿ ಬಾಲಕೃಷ್ಣ, ಶಾಸಕ ರಿಜ್ವಾನ್ ಅರ್ಷದ್, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಹಾಗೂ ಗೋವಿಂದ ರಾಜ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕಿ ಡಾ. ಬಿ.ಎಲ್. ಸುಜಾತಾ ರಾಥೋಡ್ ಪಾಲ್ಗೊಳ್ಳಲಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಕ್ಷೇತ್ರದ ಹಾಲಿ ಮತ್ತು ಮಾಜಿ ಸಂಸದರು, ಶಾಸಕರು ಹಾಗೂ ಪರಿಷತ್ ಸದಸ್ಯರು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಆಳ್ವಾಸ್ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ ಷಿಪ್ ಅನ್ನು 6 ನೇ ಬಾರಿ ಆತಿಥ್ಯ ಆಯೋಜಿಸುತ್ತಿದೆ. 85 ನೇ ಕ್ರೀಡಾಕೂಟವನ್ನು ರಾಜೀವ್ ಗಾಂಧಿ ವಿಜ್ಞಾನ ವಿವಿ ಆಶ್ರಯದಲ್ಲಿ 4 ನೇ ಬಾರಿ ಆಯೋಜಿಸಲಾಗುತ್ತಿದೆ. ರಾಷ್ಟ್ರದ ಖ್ಯಾತ ಕ್ರೀಡಾಪಟುಗಳನ್ನು ಹಾಗೂ ತರಬೇತುದಾರರ ಅನ್ನು ವಿಶೇಷವಾಗಿ
ಆಹ್ವಾನಿಸಲಾಗಿದೆ. ಆನ್ಲೈನ್ ನೋಂದಣಿ ಸೌಲಭ್ಯ ನೀಡಲಾಗಿದೆ. ರಾಷ್ಟ್ರೀಯ ಮತ್ತು ಅಂತರ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ. ಐದು ದಿನಗಳ ಕ್ರೀಡಾಕೂಟದಲ್ಲಿ ತಲಾ ಎರಡು ವಿಭಾಗದಲ್ಲಿ 47 ಸ್ಪರ್ಧೆಗಳು ನಡೆಯಲಿವೆ ಎಂದರು.
ಅತ್ಯಾಧುನಿಕ ಫೋಟೊ ಫಿನಿಶಿಂಗ್ ತಂತ್ರಜ್ಞಾನ: ಡಾ. ಆಳ್ವ
ಕ್ರೀಡಾಕೂಟಕ್ಕೆ ಬರುವ ಹಾಗೂ ನಿರ್ಗಮಿಸುವ ಕ್ರೀಡಾಪಟುಗಳು ಹಾಗೂ ಅಧಿಕಾರಿಗಳಿಗೆ ಆಳ್ವಾಸ್ ಸಂಸ್ಥೆಯಿಂದ ರೈಲ್ವೆ ನಿಲ್ದಾಣದಿಂದ ಮೂಡುಬಿದಿರೆಗೆ ಉಚಿತ ವಾಹನದ ವ್ಯವಸ್ಥೆ ಮಾಡಲಾಗಿದೆ. ಸುಸಜ್ಜಿತ ಸಿಂಥೆಟಿಕ್ ಟ್ರ್ಯಾಕ್ ನಲ್ಲಿ ಕ್ರೀಡಾಕೂಟ ಹೊನಲು ಬೆಳಕಿನ ವ್ಯವಸ್ಥೆಯಲ್ಲಿ ನಡೆಯಲಿದೆ. ಅತ್ಯಾಧುನಿಕ ಫೋಟೋ ಫಿನಿಶಿಂಗ್ ತಂತ್ರಜ್ಞಾನದ ವ್ಯವಸ್ಥೆ ಮಾಡಲಾಗಿದೆ. ಕ್ರೀಡಾಕೂಟವನ್ನು ಖೇಲೋ ಇಂಡಿಯಾ ಹಾಗೂ ಅಂತತ ರಾಷ್ಟ್ರೀಯ ವಿವಿ ಕ್ರೀಡಾಕೂಟಕ್ಕೆ ಮಾನದಂಡವಾಗಿ ಪರಿಗಣಿಸಲಾಗುವುದು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ವಿಜೇತರಾದ ಟ್ರೋಫಿಗಳ ಆಕರ್ಷಕ ‘ಟ್ರೋಪಿ ಡಿಸ್ಪ್ಲೇ ಇರಲಿದೆ ಎಂದು ಡಾ. ಮೋಹನ್ ಆಳ್ವ ತಿಳಿಸಿದರು.
ವಿಜೇತರಿಗೆ ನಗದು ಪುರಸ್ಕಾರ, ಕೂಟ ದಾಖಲೆಗೂ ನಗದು: ಡಾ. ಮೋಹನ್ ಆಳ್ವ
ಕ್ರೀಡಾಕೂಟದಲ್ಲಿ ವಿಜೇತರಿಗೆ ನಗದು ಪುರಸ್ಕಾರ ಆಕರ್ಷಕ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದ್ದು, ರಾಷ್ಟ್ರದ ವಿವಿಧ ಕಲೆ-ಸಂಸ್ಕೃತಿ ಬಿಂಬಿಸುವ ಕಲಾ ತಂಡಗಳು ಈ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಶೇಷ ಆಹ್ವಾನಿತರಿಗೆ ಆಯೋಜಕರ ವತಿಯಿಂದ ಉಚಿತ ಊಟ ಹಾಗೂ ವಸತಿ ಸೌಲಭ್ಯ ಒದಗಿಸಲಾಗುತ್ತಿದೆ. ಕ್ರೀಡಾಪಟುಗಳ ಅನುಕೂಲಕ್ಕಾಗಿ ಉತ್ತರ ಹಾಗೂ ದಕ್ಷಿಣ ಭಾರತ ಎರಡೂ ಶೈಲಿ ಊಟದ ವ್ಯವಸ್ಥೆ ಮಾಡಲಾಗಿದೆ. ವಿಜೇತರಿಗೆ 20 ಲಕ್ಷಕ್ಕೂ ಅಧಿಕ ಮೊತ್ತದ ನಗದು ಪುರಸ್ಕಾರ ವಿಜೇತರಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಗದು ಪುರಸ್ಕಾರ ಪ್ರಥಮ ಸ್ಥಾನ ಪಡೆದವರಿಗೆ 15,000 ರೂ, ದ್ವಿತೀಯ 10,000 ರೂ ಹಾಗೂ ತೃತೀಯ 5,000ರೂ, ಕೂಟ ದಾಖಲೆ ನಿರ್ಮಿಸಿದವರಿಗೆ 25,000ರೂ, ಸಮಗ್ರ ಪ್ರಶಸ್ತಿ ವಿಜೇತ ತಂಡಕ್ಕೆ 50,000 ರೂ, ರನ್ನರ್ ಅಪ್ 30,000ರೂ, ತೃತಿಯ ಸ್ಥಾನ 20,000ರೂ ನಗದು ಪುರಸ್ಕಾರ ನೀಡುವುದಾಗಿ ಡಾ. ಮೋಹನ್ ಆಳ್ವ ತಿಳಿಸಿದರು.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಸಿಂಡಿಕೇಟ್ ಸದಸ್ಯ ಪ್ರೊ. ಇಫ್ತಿಕಾರ್ ಆಲಿ, ಸಿಂಡಿಕೇಟ್ ಸದಸ್ಯ ಡಾ. ಶಿವಶರಣ, ಸೆನೆಟ್ ಸದಸ್ಯೆ ಡಾ ವೈಶಾಲಿ ಶ್ರೀಜಿತ್, ರಾಜೀವ್ಗಾಂಧಿ ಆರೋಗ್ಯ ವಿಜ್ಞಾನ ವಿವಿ ಉಪಕುಲಪತಿ ಡಾ. ಬಿ. ವಸಂತ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.



0 Comments